
ಹೊಸದುರ್ಗದ ಮಾಜಿ ಶಾಸಕ ಶ್ರೀ ಗೂಳಿಹಟ್ಟಿ ಶೇಖರ್ ಅವರು ಮಾಡಿರುವ ಆರೋಪದ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘ ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿದೆ.
ಪತ್ರಿಕಾ ಪ್ರಕಟಣೆಯಲ್ಲಿ “ಹೊಸದುರ್ಗದ ಮಾಜಿ ಶಾಸಕರಾದ ಶ್ರೀ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ‘ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ. ಹೆಡಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು’ ಎಂದು ಆರೋಪಿಸಿದ್ದಾರೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲದ ಆರೋಪ.”
“ಆರೆಸ್ಸೆಸ್ನ ಯಾವುದೇ ಕಛೇರಿಯಲ್ಲಾಗಲಿ, ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ, ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ.”
“ಇಷ್ಟಾಗಿ ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಶ್ರೀ ಗೂಳಿಹಟ್ಟಿ ಶೇಖರ್ ಅವರು ಆನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ಅವಮಾನ’ದ ಬಗ್ಗೆ ಹೇಳಿರಲಿಲ್ಲ. ಈಗ ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ.” ಎಂದು ತಿಳಿಸಿದೆ.
“ರಾಷ್ಟ್ರೀಯ ಸ್ವಯಂಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ” ಎಂದು ಸ್ಪಷ್ಟೀಕರಣ ನೀಡಿದೆ.